SUDDILIVE || SHIVAMOGGA
ದ್ವಿಭಾಷ ಸೂತ್ರ ಜಾರಿಗೆ ತರುವಂತೆ ಕರವೇ ಆಗ್ರಹ-Karave demands implementation of bilingual formula
ರಾಜ್ಯದಲ್ಲಿ ದ್ವಿಭಾಷ ಸೂತ್ರ ಜಾರಿಗೊಳಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣ ವೇದಿಕೆ ನಾರಾಯಣಗೌಡ ಬಣ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ತಮಗೆ ತಿಳಿದಿರುವಂತೆ ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ, ಮಾತ್ರವಲ್ಲ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ.
ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಹೇರಲಾಗುತ್ತಿದೆ. 2024ರ SSLC ಪರೀಕ್ಷೆಯಲ್ಲಿ 90,794 ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ, ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು 21% ರಷ್ಟಿದೆ. 2025ರಲ್ಲಿ ಈ ಸಂಖ್ಯೆ 12 ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ.
ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ. ಇದು ಹಿಂದಿಯ ಕಡ್ಡಾಯ ಶಿಕ್ಷಣದಿಂದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಶೈಕ್ಷಣಿಕ ಹೊರೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ ಹಿಂದಿಹೇರಿಕೆಗೆ ಕನ್ನಡದ ಮಕ್ಕಳ ಭವಿಷ್ಯ ಬಲಿಯಾಗುತ್ತಿದೆ ಎಂದು ಮನವಿಯಲ್ಲಿ ಸಂಘಟನೆ ಆಗ್ರಹಿಸಿದೆ.
ಮನವಿ ಸಲ್ಲಿಸುವ ವೇಳೆ ಸಂಘಟನೆಯ ಪ್ರಧಾನ ಕಾರ್ಯದರ್ಶಿಗಳಾದ ಅಂಬರೀಶ್, ಮಹಿಳಾ ಅಧ್ಯಕ್ಷರಾದ ಜ್ಯೋತಿ ಸೋಮಶೇಖರ್, ರಾಜ್ಯ ಸಹ ಕಾರ್ಯದರ್ಶಿ ಎಸ್.ಮಧು, ಮಹಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್, ಕಾರ್ಯದರ್ಶಿ ನವೀನ್, ಜಿಲ್ಲಾ ಉಪಾಧ್ಯಕ್ಷರು ಶೈಲೇಶ್ ಕುಮಾರ್, ಸೊರಬ ತಾಲೂಕು ಅಧ್ಯಕ್ಷರು ವಿಜಯ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Karave demands implementation of bilingual formula