SUDDILIVE || SHIVAMOGGA
ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣ ಮಾಡಿರುವ ಆದೇಶವನ್ನು ಪುನರ್ ಪರಿಶೀಲನೆಗೆ ಆಗ್ರಹ-Demand for review of the order classifying Scheduled Castes as reserved
ಪರಿಶಿಷ್ಟ ಜಾತಿಯ ಮೀಸಲಾತಿ ವರ್ಗೀಕರಣ ಮಾಡಿರುವ ಆದೇಶವನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ರಾಜ್ಯ ಬಂಜಾರ ಹಾಗೂ ವಿದ್ಯಾರ್ಥಿ ಸಂಘ ಆಗ್ರಹಿಸಿದೆ.
ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್. ಕರ್ನಾಟಕ ಸರ್ಕಾರಿ ಸುಪ್ರೀಂಕೋರ್ಟಿನ ಮಾನದಂಡಗಳನ್ನು ಉಲ್ಲಂಘಿಸಿ, ಅವೈಜ್ಞಾನಿಕವಾಗಿ ಪರಿಶಿಷ್ಟ ಜಾತಿಯಲ್ಲಿ ಮೀಸಲಾತಿ ವರ್ಗೀಕರಣ ಮಾಡಿದೆ. ಮೀಸಲಾತಿ ವರ್ಗೀಕರಿಸುವಾಗ ಒತ್ತಡಕ್ಕೆ ಮಣಿದಂತೆ ಕಾಣುತ್ತದೆ ಇದರಿಂದ ಭೋವಿ, ಲಂಬಾಣಿ, ಕೊರಮ-ಕೊರಚ ಹಾಗೂ ಅಲೆಮಾರಿ ಬುಡಕಟ್ಟು ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.
ಒಳಮೀಸಲಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಬೇಕು. ಪ್ರಾಯೋಗಿಕ ದತ್ತಾಂಶಗಳ ಸಂಗ್ರಹಣ ಮಾಡಿ ಅದರ ಆಧಾರದ ಮೇಲೆ ಮೀಸಲಾತಿ ಕಲ್ಪಿಸಬೇಕು. ಅಲೆಮಾರಿ ಬುಡಕಟ್ಟು ಸಮುದಾಯಗಳಿಗೆ ಪ್ರತ್ಯೇಕವಾಗಿ ಶೇ.೧ರಷ್ಟು ಮೀಸಲಾತಿ ನೀಡಬೇಕು. ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೆ ಕ್ರಮ ತೆಗೆದುಕೊಳ್ಳಬೇಕು. ಸ್ಪೃಶ್ಯ-ಅಸ್ಪೃಶ್ಯ ಎಂಬ ಪದಗಳನ್ನು ಸರ್ಕಾರದ ಕಡತಗಳಿಂದಲೇ ತೆಗೆದುಹಾಕಿ ದಮನೀತ, ಶೋಷಿತ ಹಾಗೂ ವಿಮುಕ್ತ ಜಾತಿಗಳೆಂದು ಹೆಸರಿಸಬೇಕು. ತರಾತುರಿಯಲ್ಲಿ ಮೀಸಲಾತಿ ವರ್ಗೀಕರಿಸಿರುವ ಸರ್ಕಾರಿ ಆದೇಶವನ್ನು ಪುನರ್ ಪರಿಶೀಲನೆಮಾಡಿ, ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಎಲ್ಲಾ ಜಾತಿಗಳಿಗೂ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಂಜುಳಾಬಾಯಿ, ಮಂಜಾನಾಯ್ಕ್, ರಂಗನಾಥ್, ಸಂತೋಷ್ ನಾಯ್ಕ್, ಜಯನಾಯ್ಕ್ ಇದ್ದರು.
Demand for review of the order classifying Scheduled Castes as reserved
