SUDDILIVE || SHIVAMOGGA
ವಿಬಿಜಿ ರಾಮ್ ಜಿ ವಿರುದ್ಧ ಜಿಲ್ಲಾದ್ಯಂತ ಕಾಂಗ್ರೆಸ್ ಪ್ರತಿಭಟನೆ-Congress protests across the district against VBG Ram Ji
ಕೇಂದ್ರ ಸರ್ಕಾರವು ಈ ಹಿಂದೆ ಚಾಲ್ತಿಯಲ್ಲಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದುಪಡಿಸಿ, ಅದರ ಬದಲಾಗಿ ವಿಬಿಜಿ ರಾಮ್ ಜಿ ಎನ್ನುವ ಹೊಸ ಯೋಜನೆಯನ್ನು ಜಾರಿಗೆ ತಂದಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಕುರಿತು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್, ಈ ಹೋರಾಟವು ರಾಮನ ಹೆಸರಿನ ವಿರುದ್ಧವಲ್ಲ, ಬದಲಾಗಿ ಯೋಜನೆಯ ಬದಲಾವಣೆಯಿಂದ ಜನ ಸಾಮಾನ್ಯರಿಗೆ ಎದುರಾಗುವ ಗಂಭೀರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಿದೆ. ಈ ವಿಚಾರವಾಗಿ ನ್ಯಾಯಾಲಯದ ಮೊರೆ ಹೋಗುವಂತೆ ಸಲಹೆಗಳು ಕೇಳಿಬಂದಿದ್ದರೂ, ಕಾನೂನು ಹೋರಾಟಕ್ಕೂ ಮುನ್ನ ಜನರಿಗೆ ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ನೀಡುವುದು ಅಗತ್ಯವೆಂದು ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.
ಈಗಾಗಲೇ ನಿಗದಿಪಡಿಸಿದ ವೇಳಾಪಟ್ಟಿಯಂತೆ ಜನವರಿ 15 ರಂದು ತೀರ್ಥಹಳ್ಳಿಯಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಇದರ ಮುಂದುವರಿದ ಭಾಗವಾಗಿ ಜನವರಿ 20 ರಂದು ಶಿವಮೊಗ್ಗ ನಗರದ ಗಾಂಧಿ ಪಾರ್ಕ್ನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಬೃಹತ್ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ . ಕೇವಲ ಸತ್ಯಾಗ್ರಹಕ್ಕೆ ಸೀಮಿತವಾಗದೆ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹತ್ತು ಕಿಲೋಮೀಟರ್ ಪಾದಯಾತ್ರೆಯನ್ನು ನಡೆಸಲು ನಿರ್ಧರಿಸಲಾಗಿದೆ. ಅಲ್ಲದೆ ಜನವರಿ 30 ರ ಹುತಾತ್ಮರ ದಿನದಂದು ವಿಶೇಷ ಪ್ರತಿಭಟನೆ ನಡೆಸಿ, ಮರುದಿನ ಜನವರಿ 31 ರಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಈ ಹಂತ ಹಂತದ ಹೋರಾಟವು ಫೆಬ್ರವರಿ 14 ರಂದು ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಪ್ರಸನ್ನ ಕುಮಾರ್ ಅವರು ಮಾಹಿತಿ ನೀಡಿದರು.
Congress protests across the district against VBG Ram Ji

