SUDDILIVE || SHIVAMOGGA
ಯಲವಟ್ಟಿ ಬಳಿ ರೈಲಿಗೆ ಸಿಲುಕಿ ಪಶುವೈದ್ಯಕೀಯ ವಿದ್ಯಾರ್ಥಿ ಸಾವು; ಆತ್ಮಹತ್ಯೆ ಶಂಕೆ- Veterinary student dies after being hit by train near Yelavatti; suicide suspected
ಶಿವಮೊಗ್ಗ ನಗರದ ಯಲವಟ್ಟಿ ರೈಲು ಹಳಿ ಸಮೀಪ ವಿದ್ಯಾರ್ಥಿಯೊಬ್ಬ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಸುಮಾರು 5.30ರ ವೇಳೆಗೆ ಈ ದುರ್ಘಟನೆ ನಡೆದಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಮೃತನನ್ನು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಧುಸೂಧನ್ (21) ಎಂದು ಗುರುತಿಸಲಾಗಿದೆ. ಅವರು ಪಶುವೈದ್ಯಕೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದರು. ಯಲವಟ್ಟಿ ಸಮೀಪ ರೈಲು ಹಳಿಯ ಮೇಲೆ ರೈಲಿಗೆ ಸಿಲುಕಿ ಮೃತಪಟ್ಟ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆರಂಭದಲ್ಲಿ ಮೃತನ ಗುರುತು ಪತ್ತೆಯಾಗಿರಲಿಲ್ಲ. ಬಳಿಕ ತನಿಖೆ ನಡೆಸಿದ ಅಧಿಕಾರಿಗಳು ಇಂದು ಮೃತನ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ.
ಮಧುಸೂಧನ್ ಯಾಕೆ ಈ ನಿರ್ಧಾರ ಕೈಗೊಂಡರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲವೆಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಮೃತನ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಘಟನಾ ಸ್ಥಳದಲ್ಲಿ ಮೃತನ ಬೈಕ್, ಚಪ್ಪಲಿಗಳು ಪತ್ತೆಯಾಗಿದೆ. ಬೈಕ್ ನಲ್ಲಿ ಬಂದು ಮಧು ಸೂಧನ್ ತಲೆಕೊಟ್ಟು ಸಾವನ್ನಪ್ಪಿದ್ದರಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

