SUDDILIVE || SHIVAMOGGA
ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ಸಿಎಂ ಹೆಸರು ದುರ್ಬಳಕೆ- ಲಕ್ಷಾಂತರ ರೂ ವಂಚನೆಯ ಆರೋಪ-CM's name misused to grant club licenses
ಶಿವಮೊಗ್ಗ, ಜು. 25: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವೈಯಕ್ತಿಕ ಸಹಾಯಕ (ಪಿ.ಎ.) ಎಂದು ಸುಳ್ಳು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬರು ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ಸುಮಾರು ₹15 ಲಕ್ಷ ಪಡೆದು ವಂಚನೆ ಎಸಗಿರುವ ಆರೋಪದಡಿ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಖಲಾದ ಎಫ್ಐಆರ್ ಪ್ರಕಾರ, ಶಿವಮೊಗ್ಗದ ಕೆಎಚ್ಬಿ ಕಾಲೋನಿಯ ನಿವಾಸಿ ಹಾಗೂ ರೈತರಾದ ಮಂಜುನಾಥ ಹಂಜಿ ಅವರು ದೂರು ದಾಖಲಿಸಿದ್ದಾರೆ. ಆರೋಪಿಯಾಗಿರುವ ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ ಎಂಬಾತ ಸುಮಾರು ಎಂಟು ತಿಂಗಳ ಹಿಂದೆ ಪರಿಚಯವಾಗಿ, ತಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿ.ಎ. ಎಂದು ಹೇಳಿಕೊಂಡು ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಮಂಜೂರು ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾನೆ. ಈ ನಂಬಿಕೆಯಲ್ಲಿ ದೂರುದಾರರಿಂದ ಒಟ್ಟು ₹15 ಲಕ್ಷ ಹಣ ಪಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರುದಾರರು ವಿವಿಧ ದಿನಾಂಕಗಳಲ್ಲಿ ಫೋನ್ಪೇ ಮೂಲಕ ಹಣ ವರ್ಗಾವಣೆ ಮಾಡಿರುವುದರ ಜೊತೆಗೆ, ಶಿವಮೊಗ್ಗದ ಗೋಪಾಳಗೌಡ ಬಡಾವಣೆಯ ಸಾಯಿ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಹಾಗೂ ವಡ್ಡಿನಕೊಪ್ಪದಲ್ಲಿರುವ ಆರೋಪಿಯ ಬಾಡಿಗೆ ಮನೆಯಲ್ಲಿ ಹಲವು ಹಂತಗಳಲ್ಲಿ ಲಕ್ಷಾಂತರ ರೂಪಾಯಿ ನಗದು ನೀಡಿರುವುದಾಗಿ ಆರೋಪಿಸಿದ್ದಾರೆ. ಹಣ ಸ್ವೀಕರಿಸಿದ ಬಳಿಕ ಆರೋಪಿಯು ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಇದೇ ರೀತಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಬಳಸಿಕೊಂಡು ಇನ್ನೂ ಹಲವರಿಗೆ ವಂಚನೆ ಮಾಡಿರುವ ಅನುಮಾನವಿದ್ದು, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕೆಂದು ದೂರುದಾರರು ಮನವಿ ಮಾಡಿದ್ದಾರೆ.
ಈ ದೂರಿನ ಆಧಾರದ ಮೇಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 504/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 318(4) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

