SUDDILIVE || SHIVAMOGGA
ಶಿವಮೊಗ್ಗ ಬ್ರೇಕಿಂಗ್: ಆಯನೂರು ಬಳಿ ಭೀಕರ ಹಿಟ್ ಆ್ಯಂಡ್ ರನ್ – ಅಂಬ್ಯುಲೆನ್ಸ್ ಚಾಲಕ ಸ್ಥಳದಲ್ಲೇ ದುರ್ಮರಣ-Horrific hit and run near Ayanur – Ambulance driver dies on the spot
ಶಿವಮೊಗ್ಗ, ಜುಲೈ 27: ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ-206ರಲ್ಲಿ (ಬೆಂಗಳೂರು–ಹೊನ್ನಾವರ ಮಾರ್ಗ) ಸೋಮವಾರ ಬೆಳಗಿನ ಜಾವ ಸಂಭವಿಸಿದ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಶಿವಮೊಗ್ಗ ನಗರದ ಗಾಡಿಕೊಪ್ಪ ನಿವಾಸಿ ವಿರೇಶ್ (28) ಎಂದು ಗುರುತಿಸಲಾಗಿದೆ. ಅವರು ಅಂಬ್ತುಲೆನ್ಸ್ ನ ಚಾಲಕರಾಗಿ ಕೆಲಸ ಮಾಡುತ್ತಿದ್ದರು.
ಲಭ್ಯವಿರುವ ಮಾಹಿತಿಯಂತೆ, ಬೆಳಗಿನ ಜಾವ ವಿರೇಶ್ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿರೇಶ್ ಅವರ ತಲೆಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ ಕುಂಸಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು.
ಅಪಘಾತಕ್ಕೆ ಕಾರಣವಾದ ವಾಹನ ಯಾವುದು ಎಂಬುದು ಇನ್ನೂ ಪತ್ತೆಯಾಗಿಲ್ಲ. ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಸುಳಿವುಗಳ ಆಧಾರದ ಮೇಲೆ ತನಿಖೆ ಆರಂಭಿಸಿದ್ದಾರೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.


