ಚಿಕಿತ್ಸೆಗಾಗಿ ಮಣಿಪಾಲಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತ: ವಿನೋಬನಗರ ಪಿಎಸ್‌ಐ ಮಂಜುನಾಥ್ ನಿಧನ-PSI Manjunath passes away due to heart attack

 SUDDILIVE || SHIVAMOGGA

ಚಿಕಿತ್ಸೆಗಾಗಿ ಮಣಿಪಾಲಕ್ಕೆ ತೆರಳುತ್ತಿದ್ದ ವೇಳೆ ಹೃದಯಾಘಾತ: ವಿನೋಬನಗರ ಪಿಎಸ್‌ಐ ಮಂಜುನಾಥ್ ನಿಧನ-PSI Manjunath passes away due to heart attack   
Psi, Manjunath

ಶಿವಮೊಗ್ಗ: ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ (56) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ಅವರ ನಿಧನವು ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.

ಮಂಜುನಾಥ್ ಅವರು ಮೂಲತಃ ತುಮಕೂರು ಜಿಲ್ಲೆಯ ಹಾರೋನಹಳ್ಳಿ ಗ್ರಾಮದವರಾಗಿದ್ದು, ಹಲವು ವರ್ಷಗಳಿಂದ ಶಿವಮೊಗ್ಗದ ವಿನೋಬನಗರದಲ್ಲಿ ಕುಟುಂಬ ಸಮೇತ ನೆಲೆಸಿದ್ದರು. ಅವರಿಗೆ ವಿನೋಬನಗರದಲ್ಲೇ ಸ್ವಂತ ಮನೆಯೂ ಇದೆ.

1992ರ ಬ್ಯಾಚ್‌ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ (PC) ಆಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಅವರು, ತಮ್ಮ ಸೇವಾವಧಿಯಲ್ಲಿ ಹೆಡ್ ಕಾನ್ಸ್‌ಟೇಬಲ್ (HC), ಸಹಾಯಕ ಪೊಲೀಸ್ ಉಪನಿರೀಕ್ಷಕ (ASI) ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಸುಮಾರು ನಾಲ್ಕು ವರ್ಷಗಳ ಹಿಂದೆ ಬಡ್ತಿ ಹೊಂದಿ ಪೊಲೀಸ್ ಉಪನಿರೀಕ್ಷಕ (PSI) ಆಗಿದ್ದರು. ಕಳೆದ ನಾಲ್ಕು ವರ್ಷಗಳಿಂದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮಂಜುನಾಥ್ ಅವರು ಕೆಲಕಾಲದಿಂದ ಮೂತ್ರಪಿಂಡ (ಕಿಡ್ನಿ) ಸಂಬಂಧಿತ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗದ  ಖಾಸಗಿ ಆಸ್ಪತ್ರೆ ಹಾಗೂ ಬಳಿಕ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಬುಧವಾರ ನಿಯಮಿತ ಆರೋಗ್ಯ ತಪಾಸಣೆಗಾಗಿ ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದಾರೆ. ತಕ್ಷಣ ಅವರನ್ನು ವಾಪಸ್ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ಕರೆತರಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಪ್ರಾಥಮಿಕ ಮಾಹಿತಿಯಂತೆ ಹೃದಯಾಘಾತವೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.

ವಿವಾಹಿತರಾಗಿದ್ದ ಮಂಜುನಾಥ್ ಅವರಿಗೆ ಮಕ್ಕಳಿರಲಿಲ್ಲ. ಕರ್ತವ್ಯನಿಷ್ಠೆ, ಸರಳ ವ್ಯಕ್ತಿತ್ವ ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಹೆಸರು ಗಳಿಸಿದ್ದರು.

ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಆಳವಾದ ಸಂತಾಪ ವ್ಯಕ್ತಪಡಿಸಿದ್ದು, ದಿವಂಗತ ಅಧಿಕಾರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. ಅವರ ಅಗಲಿಕೆಯಿಂದ ಪೊಲೀಸ್ ಇಲಾಖೆ ಒಬ್ಬ ಅನುಭವಿ ಹಾಗೂ ಕರ್ತವ್ಯನಿಷ್ಠ ಅಧಿಕಾರಿಯನ್ನು ಕಳೆದುಕೊಂಡಂತಾಗಿದೆ.

PSI Manjunath passes away due to heart attack

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು
close