SUDDILIVE || SHIVAMOGGA
ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ: ಸರ್ಕಾರದ ವಿರುದ್ಧ ಆರಗ ಜ್ಞಾನೇಂದ್ರ ಆಕ್ರೋಶ- Gutkha ban spells trouble for arecanut growers: Araga Jnanendra vents anger against the government
ಶಿವಮೊಗ್ಗ: ರಾಜ್ಯದಲ್ಲಿ ಗುಟ್ಕಾ ಹಾಗೂ ತಂಬಾಕು ಉತ್ಪನ್ನಗಳ ನಿಷೇಧ ಮಾಡಿದ ಸರ್ಕಾರದ ವಿರುದ್ಧ ರಾಜಕೀಯ ಹೇಳಿಕೆಗಳು ಆರಂಭವಾಗಿದೆ. ಇಷ್ಟುದಿನ ಅಡಿಕೆ ಬೆಳೆಗಾರರ ಹಿತದೃಷ್ಠಿ ಕಾಪಾಡಬೇಕು ಎನ್ನುತ್ತಿದ್ದ ಮಲೆನಾಡಿನ ಕಾಂಗ್ರೆಸ್ ನಾಯಕರ ಬಾಯಿ ಬಂದ್ ಆಗಿದ್ದು, ಆ ಸರದಿಯನ್ನ ಬಿಜೆಪಿ ನಾಯಕರು ಗುತ್ತಿಗೆ ತೆಗೆದುಕೊಂಡಂತೆ ಕಾಣುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅಡಿಕೆ ಮಾರುಕಟ್ಟೆ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು, ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಳೆದ 20 ದಿನಗಳಿಂದ ಗುಟ್ಕಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯಲ್ಲಿ ಸ್ಪಷ್ಟವಾಗಿ ಕಂಡುಬರುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಅಡಿಕೆ ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕ ಪ್ರಮುಖವಾಗಿದ್ದು, ಇಲ್ಲಿಯೇ ಇಂತಹ ನಿರ್ಧಾರ ಕೈಗೊಂಡಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಲಕ್ಷಾಂತರ ರೈತ ಕುಟುಂಬಗಳು ಅಡಿಕೆ ಬೆಳೆಯನ್ನೇ ಪ್ರಮುಖ ಆದಾಯದ ಮೂಲವನ್ನಾಗಿ ಮಾಡಿಕೊಂಡಿವೆ. ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನೀತಿ ರೂಪಿಸಬೇಕಿತ್ತು. ಆದರೆ ಗುಟ್ಕಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.
ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾರುಕಟ್ಟೆಯಲ್ಲಿ ಉಂಟಾಗಿರುವ ಪರಿಣಾಮವನ್ನು ಪರಿಶೀಲಿಸಿ ರೈತರಿಗೆ ಆಗುತ್ತಿರುವ ನಷ್ಟವನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಮುಖ್ಯಮಂತ್ರಿಗೆ ನಿಯೋಗ ಭೇಟಿ
ಅಡಿಕೆ ಬೆಳೆಗಾರರ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆಯಲು ಎಲ್ಲಾ ಪಕ್ಷಗಳ ಅಡಿಕೆ ವಲಯದ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಾಳೆ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಆರಗ ಜ್ಞಾನೇಂದ್ರ ತಿಳಿಸಿದರು.
ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು. ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರ ಬದುಕಿನ ಮೇಲೆ ಪರಿಣಾಮ ಬೀರುವ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವಾಗ ಅವರ ಹಿತವನ್ನು ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದರು.
