SUDDILIVE || SHIVAMOGGA
ಕೃಷಿ ಕಾಲೇಜು ಬಳಿ ಬಸ್-ಬೈಕ್ ಅಪಘಾತ: ಬೈಕ್ ಸವಾರ ದುರ್ಮರಣ- Bus-bike accident near Agriculture College: Bike rider nomore
ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಕೃಷಿ ಕಾಲೇಜು ಸಮೀಪ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆ ಸೆ.11ರ ರಾತ್ರಿ ಸುಮಾರು 9.30ರ ವೇಳೆಗೆ ನಡೆದಿದೆ ಎನ್ನಲಾಗಿದ್ದು, ಮೃತರನ್ನು ಕೋಟೆ ಗಂಗೂರು ನಿವಾಸಿ ಆನಂದ್ (48) ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ಆನಂದ್ ಅವರು ಬೈಕ್ ನಲ್ಲಿ ಚನ್ನಮುಂಬಾಪುರದಲ್ಲಿರುವ ಹೆಂಡತಿ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಕ್ರಾಸ್ ಮಾಡುತ್ತಿದ್ದ ಸಂದರ್ಭದಲ್ಲಿ ಸವಳಂಗ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಲ್ಲಿ ವಾಹನ ನಿಲ್ಲಿಸದೆ ಸವಳಂಗದ ಕಡೆಗೆ ತೆರಳಿದ್ದಾನೆ. ನಂತರ ಸವಳಂಗದಲ್ಲಿ ಬಸ್ ನಿಲ್ಲಿಸಿ ಅಲ್ಲಿನ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರಂಭದಲ್ಲಿ ಹಿಟ್ ಅಂಡ್ ರನ್ ಎಂದು ಭಾವಿಸಲಾಗಿದ್ದರೂ, ಬಸ್ ಸಂಪೂರ್ಣವಾಗಿ ಪರಾರಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತಕ್ಕೆ ಕಾರಣವಾದ ಬಸ್ ಶಿಕಾರಿಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಿಜಯ ಬಸ್ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೃತ ಆನಂದ್ ಸ್ಥಳೀಯ ಪತ್ರಿಕೆ ತುಂಗತರಂಗದಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಹಾಗೂ ರವಿ ಅವರ ತಂದೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
