SUDDILIVE || SHIVAMOGGA
ಪ್ರಧಾನಿ ಮೋದಿ ಹುಟ್ಟುಹಬ್ಬ: ಶಿವಮೊಗ್ಗ ಏರ್ಪೋರ್ಟ್ನಲ್ಲಿ ಬಿಜೆಪಿ ವತಿಯಿಂದ ಆಶೀರ್ವಾದದ ದೀಪ ಬೆಳಗಿಸಿ ಸಂಭ್ರಮ- PM Modi's birthday: BJP lights lamps at Shivamogga Airport to celebrate
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ಆಶೀರ್ವಾದದ ದೀಪ ಬೆಳಗಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ದೀಪ ಬೆಳಗಿಸಿ, ಶುಭಾಶಯಗಳನ್ನು ಸಲ್ಲಿಸಿದರು. “ಹೃದಯ ತುಂಬಿ ಹಾಡುವೆವು”, “ಶುಭಾಶಯಗಳು”, “ವಂದೇ ಮಾತರಂ” ಘೋಷಣೆಗಳು ಮೊಳಗಿದವು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ದೇಶದಲ್ಲಿ ವ್ಯಾಪಕ ವಿಶ್ವಾಸವಿದೆ ಎಂದು ಹೇಳಿದರು.
ನರೇಂದ್ರ ಮೋದಿ ಅವರ ನಾಯಕತ್ವವನ್ನು ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಜನರು ಒಪ್ಪಿಕೊಂಡಿದ್ದಾರೆ. ಪ್ರಧಾನಮಂತ್ರಿಯಾಗಿ ದೀರ್ಘಕಾಲ ಸೇವೆ ಸಲ್ಲಿಸುತ್ತಿದ್ದರೂ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ವಿಜಯೇಂದ್ರ ಹೇಳಿದರು.
“ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್” ಎಂಬ ಆಶಯದೊಂದಿಗೆ ದೇಶದ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಮುನ್ನಡೆಯಬೇಕಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ಯುವಶಕ್ತಿಯ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ಇಟ್ಟಿದ್ದಾರೆ ಎಂದು ಅವರು ತಿಳಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಹಾಗೂ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ವಿಜಯೇಂದ್ರ ಹೇಳಿದರು. ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳ ಪಯಣವನ್ನು ಸ್ಮರಿಸಿದ ಅವರು, ಅವರ ಜನ್ಮದಿನದ ಅಂಗವಾಗಿ ದೇಶದಾದ್ಯಂತ ಆಶೀರ್ವಾದದ ದೀಪ ಬೆಳಗಿಸುವ ಮೂಲಕ ಅವರ ಆರೋಗ್ಯ, ಆಯಸ್ಸು ಹಾಗೂ ದೇಶವನ್ನು ಮುನ್ನಡೆಸುವ ಶಕ್ತಿ ಹೆಚ್ಚಾಗಲಿ ಎಂದು ಪ್ರಾರ್ಥಿಸಲಾಗುತ್ತಿದೆ ಎಂದರು.
ಅಕ್ಟೋಬರ್ 17ರವರೆಗೆ ‘ಸೇವಾ ಸಂಕಲ್ಪ’ ಅಭಿಯಾನ
ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು.
ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪ್ರತಿಯೊಂದು ಬೂತ್ನಲ್ಲೂ ಬಿಜೆಪಿ ಕಾರ್ಯಕರ್ತರ ಜೊತೆಗೆ ಸಾರ್ವಜನಿಕರು, ಮಹಿಳೆಯರು, ಹಿರಿಯರು ಹಾಗೂ ಯುವಕರು ಪಾಲ್ಗೊಂಡು ದೀಪ ಬೆಳಗಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭ ಹಾರೈಸುತ್ತಿದ್ದಾರೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿಯೂ ಬಿಜೆಪಿ ಜಿಲ್ಲಾಧ್ಯಕ್ಷ ಜಗ್ಗಣ್ಣ ಅವರ ನೇತೃತ್ವದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಚುನಾಯಿತ ಪ್ರತಿನಿಧಿಗಳು, ಮಾಜಿ ಶಾಸಕರು, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಸಹಕಾರದೊಂದಿಗೆ ‘ಸೇವಾ ಸಂಕಲ್ಪ’ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಗವಂತ ಇನ್ನಷ್ಟು ಆಯಸ್ಸು, ಆರೋಗ್ಯ ಹಾಗೂ ಶಕ್ತಿ ನೀಡಲಿ. ಅವರ ನಾಯಕತ್ವದಲ್ಲಿ ಭಾರತ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂಬುದು ತಮ್ಮೆಲ್ಲರ ಪ್ರಾರ್ಥನೆಯಾಗಿದೆ ಎಂದು ಅವರು ಹೇಳಿದರು.

