SUDDILIVE || SHIVAMOGGA
ವಂದೇ ಮಾತರಂ ಹಾಡಿನ ವಿವಾದ: ಎರಡು ಚರಣ ಮಾತ್ರ ಹಾಡಿದ್ದಕ್ಕೆ ವಿರೋಧಿಸಿ ಕಾರ್ಯಕ್ರಮದಿಂದ ಹೊರನಡೆದ ಶಾಸಕ ಚನ್ನಬಸಪ್ಪ- Vande Mataram song controversy: MLA Channabasappa walks out of the program in protest over only two stanzas being sung
ಶಿವಮೊಗ್ಗ, ಸೆ.15: ವಂದೇ ಮಾತರಂ ಹಾಡಿನ ಕುರಿತು ರಾಜ್ಯದ ವಿವಿಧೆಡೆ ಚರ್ಚೆ ನಡೆಯುತ್ತಿರುವ ನಡುವೆಯೇ, ಶಿವಮೊಗ್ಗದಲ್ಲೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಸೃಷ್ಟಿಯಾಗಿದೆ. ನಗರದ ಡಾ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಯುವಸಂಸತ್ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡಿನ ಕೇವಲ ಎರಡು ಚರಣಗಳನ್ನು ಮಾತ್ರ ಹಾಡಲಾಗಿದೆ ಎಂದು ಆರೋಪಿಸಿ, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಕಾರ್ಯಕ್ರಮದಿಂದ ಹೊರನಡೆದ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ನ್ಯಾಯಾಂಗ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ವಂದೇ ಮಾತರಂ ಗೀತೆಯ ಪೂರ್ಣ ಆವೃತ್ತಿಯನ್ನು ಹಾಡದೆ, ಕೇವಲ ಎರಡು ಚರಣಗಳನ್ನು ಮಾತ್ರ ಹಾಡಲಾಗಿದೆ ಎಂಬ ಆಕ್ಷೇಪ ವ್ಯಕ್ತವಾಯಿತು.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಚನ್ನಬಸಪ್ಪ ಅವರು, ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡಬೇಕೆಂಬ ತಮ್ಮ ಅಭಿಪ್ರಾಯವನ್ನು ತಿಳಿಸಿ, ಬಳಿಕ ಕಾರ್ಯಕ್ರಮ ಸ್ಥಳದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಹರಿದಾಡುತ್ತಿವೆ.
ವಂದೇ ಮಾತರಂ ಹಾಡಿನ ಕುರಿತಾಗಿ ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಶಿವಮೊಗ್ಗದಲ್ಲೂ ಈ ಘಟನೆ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಜಿಲ್ಲಾಡಳಿತ ಅಥವಾ ಕಾರ್ಯಕ್ರಮ ಆಯೋಜಕರಿಂದ ಈ ಕುರಿತು ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.
ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಸಂತೋಷ ಕುಮಾರ್, ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಸಿಇಒ ಹೇಮಂತ್ ಕುಮಾರ್, ಅಡಿಷನಲ್ ಎಸ್ಪಿ ಕಾರ್ಯಪ್ಪ ಎದುರೆ ಶಾಸಕರು ಸಭಾತ್ಯಾಗ ನಡೆಸಿರುವುದು ಪ್ರತಿಭಟನೆಯ ರೂಪದಲ್ಲಿತ್ತು.
